Revenue Facts

ಸಚಿವ ಸಂಪುಟ ಸಭೆ: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ಸಂಪುಟ ಹಸಿರು ನಿಶಾನೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು(ಜೂನ್ 15) ನಡೆದ ಸಚಿವ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಮತಾಂತರ ನಿಷೇಧ ಕಾಯ್ದೆಗೆ (amend anti-conversion law) ತಿದ್ದುಪಡಿ ತರಲು ಮತ್ತು ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.

ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದುನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯ ಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಎಪಿಎಂಸಿ ಕಾನೂನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಸಣ್ಣ ನೀರಾವರಿ ಇಲಾಖೆ ಪ್ರಸ್ತಾವನೆಗೆ ಸಂಪುಟ ಅನುಮೋದಿಸಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 83 ಕೆರೆಗಳ ಭರ್ತಿ ಮಾಡುವುದು. 1081 ಕೋಟಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಿಸಿದ ನೀರನ್ನು ಕೆರೆಗಳಿಗೆ ಹರಿಸಲು ಸಂಪುಟ ಸಮ್ಮತಿಸಿದೆ.
ವಿಪತ್ತು ನಿರ್ವಹಣೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿದ್ದು, ಸಾರಿಗೆ ನಿಗಮಗಳ 79 ಕೋಟಿ ರೂ. ಮೋಟಾರ್ ವೆಹಿಕಲ್ ಟ್ಯಾಕ್ಸ್ ವಿನಾಯಿತಿಗೆ ತಿರ್ಮಾನಿಸಲಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆ: ಹೆಡ್ಗೇವಾರ್, ಸೂಲಿಬೆಲೆ ಬರೆದ ಅಂಶ ಕೈಬಿಟ್ಟ ಸರ್ಕಾರ
ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರ್ಎಸ್ಎಸ್ ಸಂಸ್ಥಾಪಕ ಕೇಶವ ಹೆಡ್ಗೇವಾರ್ ಭಾಷಣ ತೆಗೆದಿದ್ದೇವೆ. ಸಾವರ್ಕರ್, ಚಕ್ರವರ್ತಿ ಸೂಲಿಬೆಲೆ ಬರೆದ ಅಂಶಗಳನ್ನು ಸಹ ತೆಗೆದಿದ್ದೇವೆ. ಮಕ್ಕಳು ಸರಿಯಾದ ವಿಚಾರ ಕಲಿಯಬೇಕೆಂದು ಕೆಲ ಬದಲಾವಣೆ ಮಾಡಿದ್ದೇವೆ. ನಾವು ತುಂಬಾ ಆಳವಾಗಿ ಹೋಗಬೇಕಾಗಿತ್ತು, ಹಾಗೆ ಮಾಡಿಲ್ಲ. ಸರ್ಕಾರಕ್ಕೆ ಹೊರೆಯಾಗದಂತೆ ಸರಳವಾಗಿ ಪಠ್ಯ ಪರಿಷ್ಕರಿಸಿದ್ದೇವೆ ಎಂದರು.

Exit mobile version