ಬೆಂಗಳೂರು, ಆ. 07 :ಬಿಬಿಎಂಪಿ ವ್ಯಾಪ್ತಿಯಲ್ಲಿ 2019 ರಿಂದ ಈವರೆಗೆ ನಡೆದಿರುವ ಕಾಮಗಾರಿಗಳ ಅಕ್ರಮಗಳ ಕುರಿತು ತನಿಖೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ ನಾಲ್ವರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ದಳಗಳನ್ನುರಚಿಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಘನತ್ಯಾಜ್ಯ ನಿರ್ವಹಣೆ, ರಸ್ತೆ ಅಭಿವೃದ್ಧಿ ಓಎಫ್ಸಿ ಕೇಬಲ್ ಅಳವಡಿಕೆ,ಬೃಹತ್ ನೀರು ಕಾಲುವೆ ಕಾಮಗಾರಿ, ಕೇಂದ್ರ ವಲಯ ನಗರ ಯೋಜನೆಗಳ ನಕ್ಷೆ ಮಂಜೂರಾತಿ, ಪತ್ರ ನೀಡುವಿಕೆ, ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿಗಳು, ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ದೂರುಗಳನ್ನು ತನಿಖೆ ನಡೆಸಲು ಸೂಚಿಸಲಾಗಿದೆ.ತನಿಖೆಗೆ ನಾಲ್ವರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಘನತ್ಯಾಜ್ಯ ನಿರ್ವಹಣೆ ಕಾಮಗಾರಿಗಳ ಆರೋಪಗಳ ಕುರಿತು ಹಿರಿಯ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರರಾದ ದೊಡ್ಡಿಹಾಳ್, ಬಸವರಾಜ ಕೋಟಿ, ಕೆಪಿಟಿಸಿಎಲ್ನ ನಿವೃತ್ತ ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಪ್ರಭಾಕರ್ ಅನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.