![](https://revenuefacts.com/wp-content/uploads/2023/09/process-aws-27.webp)
ಬೆಂಗಳೂರು: ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ಹೆಚ್ಚಿಸಿದ್ದು, ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಪರಿಷ್ಕೃತ ಮಾರ್ಗಸೂಚಿ ದರ ಕರಡು ಸಿದ್ದಪಡಿಸಲಾಗಿದೆ. ಸಾರ್ವಜನಿಕ ಆಕ್ಷೇಪಣೆಗೆ ಕಾಲಾವಕಾಶ ನೀಡಿದ್ದು, ಅಕ್ಟೋಬರ್ 1 ರಿಂದ ಪರಿಷ್ಕೃತ ಮಾರ್ಗಸೂಚಿ ದರ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದರು.ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ಪರಿಷ್ಕರಣೆ ಮಾಡಿರಲಿಲ್ಲ. ಮಾರ್ಗಸೂಚಿ ಬೆಲೆಯಲ್ಲಿ ಬಾರೀ ವ್ಯತ್ಯಾಸವಿದ್ದು ಅದನ್ನು ಸರಿ ಪಡಿಸಲಾಗುವುದು.
ಗರಿಷ್ಠ 50 ರಿಂದ ಕನಿಷ್ಠ 20 ರಷ್ಟು ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ಹೆಚ್ಚಳ ಮಾಡಲಾಗಿದೆ. ಇದರಿಂದ ಕಪ್ಪು ಹಣ ವಹಿವಾಟು ನಿಯಂತ್ರಣವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.ದರ ಪರಿಷ್ಕರಣೆಯಿಂದ ಆರಂಭಿಕ ಹಂತದಲ್ಲಿ ಆಸ್ತಿಗಳ ಖರೀದಿ ಮತ್ತು ಮಾರಾಟ ಪ್ರಕ್ರಿಯೆ ತುಸು ಕುಂಠಿತವಾಗಬಹುದು. ನಂತರ ಸುಧಾರಣೆ ಆಗಲಿದ್ದು, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಸಂಗ್ರಹದಲ್ಲಿ ಸುಮಾರು ಎರಡು ಸಾವಿರ ಕೋಟಿ ಹೆಚ್ಚಳ ವಾಗುವ ನಿರೀಕ್ಷೆಯಿದೆ. ಸಾರ್ವಜನಿಕರ ಆಕ್ಷೇಪಣೆ ಮತ್ತು ಸಲಹೆ ಮುಗಿದ ಬಳಿಕ ಪರಿಷ್ಕೃತ ಮಾರ್ಗಸೂಚಿ ದರ ಜಾರಿ ಕುರಿತು ಅಧಿಸೂಚನೆ ಹೊರಡಿಸಲಾಗುವುದು ಎಂದರು.
ಸರ್ಕಾರಿ ಆಸ್ತಿ ರಕ್ಷಣೆಗೆ ಆಪ್ : ರಾಜ್ಯದಲ್ಲಿ ಸರ್ಕಾರಿ ಆಸ್ತಿ ರಕ್ಷಿಸಲು ಆಪ್ ತಯಾರಿಸಲಾಗಿದೆ. ಶೀಘ್ರದಲ್ಲಿ ಅದನ್ನು ಜಾರಿಗೆ ತರಲಾಗುವುದು. ಗ್ರಾಮ ಲೆಕ್ಕಿಗರು ತಮ್ಮ ವ್ಯಾಪ್ತಿಯ ಸರ್ಕಾರಿ ಆಸ್ತಿಯ ವಿವರ ಆಪ್ ನಲ್ಲಿ ನಮೂದಿಸಬೇಕು. ತಿಂಗಳಿಗೊಮ್ಮೆ ಸ್ಥಳ ಪರಿಶೀಲಿಸಿ ಪೋಟೋ ಅಪ್ ಲೋಡ್ಮಾಡಲು ಅವಕಾಶ ಕಲ್ಪಿಸಲಾಗಿದೆ.ಇದರಿಂದ ಸರ್ಕಾರದ ಭೂ ಕಬಳಿಕೆಗೆ ಬ್ರೇಕ್ ಬೀಳಲಿದೆ ಎಂದು ಭರವಸೆ ನೀಡಿದರು.