21.4 C
Bengaluru
Saturday, July 27, 2024

ಬರಿ ಹಣ ಮತ್ತು ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂನ್ 26 : ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಬೆವರು-ಶ್ರಮ ಸಂಸ್ಕೃತಿಗೆ ಅಸಹ್ಯ ಪಡದವರನ್ನು ಜನ ಗೌರವಿಸಿ ಗೆಲ್ಲಿಸುತ್ತಾರೆ

ಜನಪರ ನಿಲುವು, ಜನಪರ ಭಾಷೆ, ವಿಷಯ ತಜ್ಞತೆ, ಅಧ್ಯಯನಶೀಲತೆ, ಸಿದ್ಧತೆ ಮತ್ತು ತರಬೇತಿ ಪ್ರತಿ ಶಾಸಕರಿಗೆ ಅತ್ಯಗತ್ಯ

ಜನಪರ ಕಾಳಜಿ ಇಲ್ಲದವರು ಆಕಸ್ಮಿಕವಾಗಿ ಒಮ್ಮೆ ಗೆಲ್ಲಬಹುದು ಅಷ್ಟೆ

ಬರಿ ಹಣ ಮತ್ತು ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ

ಒಮ್ಮೆಯಾದರೂ ವಿಧಾನಸೌಧದ ಮೆಟ್ಟಿಲು ಹತ್ತಬೇಕು ಎನ್ನುವ ತವಕ ಬಹಳ ಶಾಸಕರಿಗೆ ಇರತ್ತೆ. ಅವರಲ್ಲಿ ಹಲವರು ಅಧಿವೇಶನಗಳಲ್ಲಿ ಇರುವುದೇ ಇಲ್ಲ. ಇದು ತಪ್ಪು

ಸಂಸದೀಯ ಭಾಷೆ ಕಲಿತು ವಿಷಯ ತಜ್ಞರಾಗಿ: ಶಾಸಕರಿಗೆ ಮುಖ್ಯಮಂತ್ರಿ ಸಲಹೆ

ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಿ. ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮಬದ್ದವಾಗಿ ಸದನದ ಮುಂದೆ ಮಂಡಿಸಬಹುದು ಎಂದರು.

ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ ಎಂದರು.

ಬಸವಣ್ಣನವರ ಬಜೆಟ್

ಶಾಸಕರು ಸಂಸದರು ಬಜೆಟ್ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್ ಬಗ್ಗೆ ಹೇಳಿದ್ದಾರೆ. ಕಾಯಕ ಮತ್ತು ದಾಸೋಹ ಬಜೆಟ್ ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ. ಬಜೆಟ್ ಅಂದರೆ ಇಷ್ಟೆ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್ ನ ಮೌಲ್ಯ ಎಂದು ವಿವರಿಸಿದರು.

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ವಿಧಾನ‌ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಉಪಸ್ಥಿತರಿದ್ದರು.

ನೂರು ಕುರಿ ಎಣಿಸಕ್ಕೆ ಬಾರದವನು

ನಾನು ಮೊದಲ ಬಾರಿ ಹಣಕಾಸು ಸಚಿವನಾದಾಗ “ನೂರು ಕುರಿ ಎಣಿಸಲು ಬಾರದವನು ಬಜೆಟ್ ಹೇಗೆ ಮಾಡ್ತಾರೆ?” ಎಂದು ಪತ್ರಿಕೆಯೊಂದು ಟೀಕಿಸಿತ್ತು. ಟೀಕೆಯನ್ನು ನಾನು ಸವಾಲಾಗಿ ಸ್ವೀಕರಿಸಿ ನಿರಂತರ ವಿಷಯ ತಜ್ಞರ ಜತೆ ಚರ್ಚಿಸಿ ಬಜೆಟ್ ಮಂಡಿಸಿದೆ. ಮರುದಿನ “THE HINDU” ಪತ್ರಿಕೆ ನನ್ನ ಬಜೆಟ್ ಅನ್ನು ಅತ್ಯುತ್ತಮ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಹೀಗಾಗಿ ಜ್ಞಾನ ದಾಹ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳಿ ಎಂದು ತಮ್ಮದೇ ಉದಾಹರಣೆ ಮೂಲಕ ಶಾಸಕರಿಗೆ ತಿಳಿ ಹೇಳಿದರು.

ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಈಶ್ವರಪ್ಪ ಶಾಸಕರಾಗಲು ಸಾಧ್ಯವಿರಲಿಲ್ಲ

ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ಸಂವಿಧಾನದ ಮೌಲ್ಯ ಅರಿತುಕೊಳ್ಳಿ ಎಂದು ಮುಖ್ಯಮಂತ್ರಿ ಮನವರಿಕೆ ಮಾಡಿಸಿದರು.

ಶಾಸಕರು ವಾಟಾಳ್ ಮಾಡೆಲ್ ಪಾಲಿಸಬೇಕು

ವಾಟಾಳ್ ನಾಗರಾಜ್ ಅವರು ಒಬ್ಬ ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಇದನ್ನು ಪ್ರತಿಯೊಬ್ಬರೂ ಪಾಲಿಸಿ ಎಂದು ಸೂಚಿಸಿದರು.

* ಬಂದೆ ಪುಟ್ಟ-ಹೋದೆ ಪುಟ್ಟ ಅಂತಾಗಬೇಡಿ.

* ಶಾಂತವೇರಿ ಗೋಪಾಲಗೌಡರನ್ನು ಇವತ್ತಿಗೂ ಇಡಿ ನಾಡು ಯಾಕೆ ಸ್ಮರಿಸುತ್ತದೆ ಎನ್ನುವುದನ್ನು ಅರ್ಥಮಾಡಿಕೊಳ್ಳಿ

* 224 ಶಾಸಕರುಗಳಲ್ಲಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದವರು 70 ಮಂದಿ.

* ಮಾಜಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಮಾಜಿ ಸಚಿವ ಜನಾರ್ದನರೆಡ್ಡಿ ಅವರು ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.

* ರಾಜ್ಯದ ಮೊದಲ ಬಜೆಟ್ ಕೇವಲ 21 ಕೋಟಿ 3 ಲಕ್ಷ ಇತ್ತು.

* ಈಗಿನ ಬಜೆಟ್ 3 ಲಕ್ಷದ 9 ಸಾವಿರ ಕೋಟಿ ಆಗಿದೆ.

* ಬಡವರ ಮತ್ತು ಮಧ್ಯಮ ವರ್ಗದವರ ಅನುಕೂಲಕ್ಕೆ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಿಗೆ 50 ಸಾವಿರ ಕೋಟಿಯಷ್ಟು ಹಣ ಬೇಕಾಗುತ್ತದೆ.

Related News

spot_img

Revenue Alerts

spot_img

News

spot_img